ಕೊವೀಡ್-19 ಮೊಬೈಲ್ ಫೀವರ್ ಕ್ಲಿನಿಕ್ ಬಸ್ ಸಂಚಾರಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ 


Mysuru



ಮೈಸೂರು 


ಜಿಲ್ಲೆಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮೈಸೂರು ಗ್ರಾಮಾಂತರ ವಿಭಾಗದ ವತಿಯಿಂದ ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ 'ಕೊವೀಡ್-19 ಮೊಬೈಲ್ ಫೀವರ್ ಕ್ಲಿನಿಕ್ ಬಸ್' ಸಂಚಾರಕ್ಕೆ ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೆಎಸ್‌ಆರ್‌ಟಿಸಿ ವತಿಯಿಂದ ರಾಜ್ಯದಲ್ಲಿ ಇದೇ ಪ್ರಥಮ ಬಾರಿಗೆ ಕೊವೀಡ್-19 ಮೊಬೈಲ್ ಫೀವರ್ ಕ್ಲಿನಿಕ್ ಬಸ್ ಆರಂಭಿಸಿದ್ದು, ಮೈಸೂರು ಗ್ರಾಮಾಂತರ ಹಾಗೂ ನಗರ ವಿಭಾಗದ ಅಧಿಕಾರಿಗಳು ಬಹಳ ಕಡಿಮೆ ಅವಧಿಯಲ್ಲಿ ನಿರ್ಮಿಸಿದ್ದಾರೆ. ನಮ್ಮ ವೈದ್ಯರ ತಂಡವು ಕೂಡಾ ಬಸ್ ಪರಿಶೀಲಿಸಿ ಚಿಕಿತ್ಸೆ ನೀಡಲು ಯೋಗ್ಯವಾಗಿದೆ ಒಪ್ಪಿಗೆ ಸೂಚಿಸಿದ್ದಾರೆ ಎಂದರು.

ಬಸ್ ಸಂಚಾರವು ಪ್ರಮುಖವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಸಂಚರಿಸಲಿದ್ದು, ಅಲ್ಲಿನ ಜನರಿಗೆ ಹೆಚ್ಚು ಉಪಯೋಗವಾಗಲಿದೆ. ನಗರ ಪ್ರದೇಶದ ಜನರಿಗೆ ಸಮೀಪದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಜಿಲ್ಲಾಸ್ಪತ್ರೆ ಇರುವುದರಿಂದ ಅವರಿಗೆ ಇದರ ಅಗತ್ಯ ಕಡಿಮೆ. ಅದರಂತೆ ಈಗಾಗಲೇ ಸೋಂಕು ಕಂಡುಬಂದಿರುವ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಬಸ್ ಸಂಚರಿಸಿ ತಪಾಸಣೆ ನಡೆಸಲಿದೆ ಎಂದು ಮಾಹಿತಿ ನೀಡಿದರು.

ಬಸ್ಸಿನಲ್ಲಿ ಒಬ್ಬರು ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳಿಗೂ ಇರುತ್ತಾರೆ. ಪ್ರಾಥಮಿಕವಾಗಿ ಕಂಡುಬರುವ ಜ್ವರ, ನೆಗಡಿ, ಕೆಮ್ಮು ಹಾಗೂ ಮದುಮೇಹಕ್ಕೆ ಮಾತ್ರ ಚಿಕಿತ್ಸೆ ನೀಡುತ್ತಾರೆ. ಇಲ್ಲಿ ಸ್ವಾಬಿಂಗ್ ತಪಾಸಣೆ ಮಾಡುವುದಿಲ್ಲ. ಅಗತ್ಯವಿದ್ದರೆ ಸ್ಥಳೀಯ ಅಂಬುಲೆನ್ಸ್ ಮೂಲಕ ಸಮೀಪವಿರುವ ಸ್ವಾಬಿಂಗ್ ಸೆಂಟರ್ ಒಳಗೊಂಡಿರುವ ಆಸ್ಪತ್ರೆಗೆ ಕಳುಹಿಸಿಕೊಡುತ್ತಾರೆ ಎಂದು ತಿಳಿಸಿದರು.

ಮೈಸೂರು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿಲ್ಲ. ಶುಕ್ರವಾರ ತಡರಾತ್ರಿ P111 ಎಂಬವರು ಡಿಸ್ಚಾರ್ಜ್ ಆಗಿದ್ದಾರೆ. ಶನಿವಾರವು ಕೆಲವರು ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ. ನಂಜನಗೂಡಿನ ಜುಬಿಲಿಯಂಟ್ ಕಾರ್ಖಾನೆಯ ಸೋಂಕಿತರೊಡನೆ ಹಾಗೂ ಹೆಬ್ಯಾ ಗ್ರಾಮದ ಸೋಂಕಿತರ ಜೊತೆ ಪ್ರಥಮ ಸಂಪರ್ಕ ಹೊಂದಿದ್ದವರಿಗೆ ಇಂದು ಪರೀಕ್ಷೆ ಮಾಡಲಾಗುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಣದಲ್ಲಿದೆ ಎಂದರು.


ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಪ್ರಶಾಂತ್ ಕುಮಾರ್ ಮಿಶ್ರಾ, ಡಿಎಚ್‌ಒ ಡಾ.ವೆಂಕಟೇಶ್, ಕೆ.ಎಸ್.ಆರ್.ಟಿ.ಸಿ ಮೈಸೂರು ಗ್ರಾಮಾಂತರ ವಿಭಾಗದ ಅಧಿಕಾರಿ ಆರ್.ಆಶೋಕ್ ಕುಮಾರ್, ನಗರ ವಿಭಾಗದ ಅಧಿಕಾರಿ ಎಸ್.ಪಿ.ನಾಗರಾಜು ಸೇರಿದಂತೆ ಸಿಬ್ಬಂದಿ ವರ್ಗದವರು ಹಾಜರಿದ್ದರು.


Bangalore Hot News